19
 1 ಬುದ್ಧಿಹೀನನ ವಕ್ರ ತುಟಿಗಳಿಗಿಂತ, 
ನಿರ್ದೋಷವಾಗಿ ನಡೆಯುವ ಬಡವನು ಉತ್ತಮ. 
 2 ಪರಿಜ್ಞಾನವಿಲ್ಲದ ಆಸಕ್ತಿಯು ಯುಕ್ತವಲ್ಲ; 
ತನ್ನ ಹೆಜ್ಜೆಗಳಲ್ಲಿ ದುಡುಕುವವನು ದಾರಿ ತಪ್ಪುವನು. 
 3 ಮನುಷ್ಯನ ಬುದ್ಧಿಹೀನತೆ ಅವನ ದುರ್ಗತಿಗೆ ದಾರಿಯಾಗಿದೆ, 
ಆದರೂ ಅವನ ಹೃದಯವು ಯೆಹೋವ ದೇವರಿಗೆ ವಿರೋಧವಾಗಿ ಉರಿಗೊಳ್ಳುತ್ತದೆ. 
 4 ಸಂಪತ್ತು ಅನೇಕ ಮಂದಿ ಸ್ನೇಹಿತರನ್ನು ಮಾಡಿಕೊಳ್ಳುತ್ತದೆ; 
ಆದರೆ ಬಡವನು ತನ್ನ ಆಪ್ತಸ್ನೇಹಿತನಿಂದ ದೂರವಾಗುತ್ತಾನೆ. 
 5 ಸುಳ್ಳುಸಾಕ್ಷಿಯು ದಂಡನೆಯನ್ನು ಹೊಂದದಿರನು; 
ಸುಳ್ಳಾಡುವವನು ತಪ್ಪಿಸಿಕೊಳ್ಳದೆ ಇರಲಾರನು. 
 6 ಅನೇಕರು ಅಧಿಪತಿಯಿಂದ ಸಹಾಯ ಪಡೆಯುತ್ತಾರೆ. 
ಕಾಣಿಕೆಗಳನ್ನು ಕೊಡುವವನಿಗೆ ಪ್ರತಿಯೊಬ್ಬನೂ ಸ್ನೇಹಿತನೇ. 
 7 ಬಡವನ ಬಂಧುಗಳೆಲ್ಲರು ಅವನನ್ನು ಹಗೆ ಮಾಡುತ್ತಾರೆ; 
ತನ್ನ ಸ್ನೇಹಿತರು ತನ್ನಿಂದ ಎಷ್ಟೋ ಹೆಚ್ಚಾಗಿ ದೂರ ಹೋಗುತ್ತಾರಲ್ಲವೇ? 
ಮಾತುಗಳಿಂದ ಅವನು ಮೊರೆಯಿಟ್ಟು ಹಿಂಬಾಲಿಸಿದರೂ 
ಅವನಿಗೆ ಏನೂ ದೊರಕದು. 
 8 ಜ್ಞಾನವನ್ನು ಸಂಪಾದಿಸಿಕೊಳ್ಳುವವನು ತನ್ನ ಪ್ರಾಣವನ್ನೇ ಪ್ರೀತಿಸುತ್ತಾನೆ; 
ತಿಳುವಳಿಕೆಯನ್ನು ಪ್ರೀತಿಸುವವನು ಶೀಘ್ರದಲ್ಲೇ ಏಳಿಗೆ ಹೊಂದುತ್ತಾನೆ. 
 9 ಸುಳ್ಳುಸಾಕ್ಷಿಯು ಶಿಕ್ಷೆಹೊಂದದೇ ಇರುವುದಿಲ್ಲ; 
ಸುಳ್ಳಾಡುವವನು ಹಾಳಾಗಿ ಹೋಗುವನು. 
 10 ಬುದ್ಧಿಹೀನನಿಗೆ ಭೋಗಜೀವನವು ಯುಕ್ತವಲ್ಲ; 
ಅಧಿಪತಿಗಳ ಮೇಲೆ ದೊರೆತನ ಮಾಡುವುದು ಸೇವಕನಿಗೆ ಯುಕ್ತವೇ ಅಲ್ಲ. 
 11 ಮನುಷ್ಯನ ಜ್ಞಾನವು ತಾಳ್ಮೆಯನ್ನು ನೀಡುತ್ತದೆ; 
ಅಪರಾಧವನ್ನು ಲಕ್ಷಿಸದೆ ಇರುವುದು ಅವನಿಗೆ ಮಹಿಮೆಯಾಗಿದೆ. 
 12 ಅರಸನ ಕೋಪವು ಸಿಂಹದ ಘರ್ಜನೆಯಂತಿದೆ; 
ಆದರೆ ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ. 
 13 ಬುದ್ಧಿಹೀನನಾದ ಮಗನು ತನ್ನ ತಂದೆಗೆ ಹಾನಿಕರನು; 
ಜಗಳವಾಡುವ ಹೆಂಡತಿ 
ಯಾವಾಗಲೂ ತೊಟ್ಟಿಕ್ಕುವ ಹನಿ. 
 14 ಮನೆಯೂ ಸಂಪತ್ತೂ ಪಿತೃಗಳ ಸ್ವಾಸ್ತ್ಯವು; 
ವಿವೇಕಿಯಾದ ಹೆಂಡತಿಯು ಯೆಹೋವ ದೇವರಿಂದಲೇ. 
 15 ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುತ್ತದೆ; 
ಸೋಮಾರಿಯು ಹಸಿವೆಗೊಳ್ಳುವನು. 
 16 ಯಾರು ಆಜ್ಞೆಗಳನ್ನು ಪಾಲಿಸುತ್ತಾನೋ ಅವನು ತನ್ನ ಜೀವವನ್ನು ಉಳಿಸಿಕೊಳ್ಳುತ್ತಾನೆ, 
ಆದರೆ ಅವುಗಳನ್ನು ಅಸಡ್ಡೆ ಮಾಡುವವನು ಸಾಯುವನು. 
 17 ಬಡವರಿಗೆ ದಯೆ ತೋರಿಸುವವನು ಯೆಹೋವ ದೇವರಿಗೆ ಸಾಲ ಕೊಡುತ್ತಾನೆ; 
ಆತನು ಅವನ ಉಪಕಾರಕ್ಕಾಗಿ ಪ್ರತ್ಯುಪಕಾರ ಮಾಡುವನು. 
 18 ಇನ್ನೂ ನಿರೀಕ್ಷೆ ಇರುವಾಗಲೇ ನಿನ್ನ ಮಗನನ್ನು ಶಿಕ್ಷಿಸು; 
ಅವನ ಮರಣಕ್ಕೆ ನೀನು ಕಾರಣನಾಗಬೇಡ. 
 19 ಕೋಪಿಷ್ಟನು ಶಿಕ್ಷೆಯನ್ನು ಅನುಭವಿಸುವನು; 
ಅವನನ್ನು ನೀನು ಬಿಡಿಸಿದರೆ, ತಿರುಗಿ ನೀನು ಬಿಡಿಸಬೇಕಾಗುವುದು. 
 20 ಬುದ್ಧಿವಾದವನ್ನು ಕೇಳಿ, ಶಿಕ್ಷಣವನ್ನು ಅಂಗೀಕರಿಸು; 
ಕಡೆಯಲ್ಲಿ ನೀನು ಜ್ಞಾನಿಯಾಗುವೆ. 
 21 ಮನುಷ್ಯನ ಹೃದಯದಲ್ಲಿ ಅನೇಕ ಯೋಜನೆಗಳಿವೆ; 
ಆದರೂ ಯೆಹೋವ ದೇವರ ಸಂಕಲ್ಪವೇ ಈಡೇರುವುದು. 
 22 ನಿಷ್ಠೆಯು ಮನುಷ್ಯನನ್ನು ಆಕರ್ಷಕನನ್ನಾಗಿ ಮಾಡುತ್ತದೆ. 
ಬಡವನು ಸುಳ್ಳುಗಾರನಿಗಿಂತ ಲೇಸು. 
 23 ಯೆಹೋವ ದೇವರ ಭಯವು ಜೀವದಾಯಕವು; 
ಆಗ ಅವನು ತೃಪ್ತನಾಗಿ ನೆಲೆಗೊಳ್ಳುವನು; ಅವನಿಗೆ ಕೇಡು ಸಂಭವಿಸುವುದಿಲ್ಲ. 
 24 ಮೈಗಳ್ಳನು ಪಾತ್ರೆಯೊಳಗೆ ತನ್ನ ಕೈಯನ್ನು ಮುಳುಗಿಸಿ, 
ಅವನು ಅದನ್ನು ಮತ್ತೆ ತನ್ನ ಬಾಯಿಗೆ ತರುವುದಿಲ್ಲ! 
 25 ಪರಿಹಾಸ್ಯಗಾರನನ್ನು ಹೊಡೆದರೆ, ಮುಗ್ಧರು ಎಚ್ಚರಗೊಳ್ಳುವರು; 
ವಿವೇಕಿಯನ್ನು ಗದರಿಸಿದರೆ, ಅವನು ಪರಿಜ್ಞಾನವನ್ನು ಗ್ರಹಿಸುವನು. 
 26 ಯಾರು ತಂದೆಯನ್ನು ದೋಚಿಕೊಂಡು ತಾಯಿಯನ್ನು ಓಡಿಸುವರೋ 
ನಾಚಿಕೆಯನ್ನುಂಟುಮಾಡಿ, ನಿಂದೆಯನ್ನು ತರುತ್ತಾರೆ. 
 27 ಮಗನೇ, ನೀನು ಬುದ್ಧಿವಾದಕ್ಕೆ ಲಕ್ಷ್ಯಕೊಡದಿದ್ದರೆ, 
ಪರಿಜ್ಞಾನದ ಮಾತುಗಳಿಂದ ದಾರಿತಪ್ಪುವೆ. 
 28 ಭ್ರಷ್ಟನ ಸಾಕ್ಷಿಯು ನ್ಯಾಯತೀರ್ಪನ್ನು ಗೇಲಿ ಮಾಡುತ್ತದೆ; 
ದುಷ್ಟನ ಬಾಯಿಯು ದ್ರೋಹವನ್ನು ನುಂಗುವುದು. 
 29 ಪರಿಹಾಸ್ಯಗಾರರಿಗೆ ನ್ಯಾಯ ತೀರ್ಪುಗಳೂ, 
ಬುದ್ಧಿಹೀನರ ಬೆನ್ನಿಗೆ ಪೆಟ್ಟುಗಳೂ ಸಿದ್ಧವಾಗಿವೆ. 
 Languages
Languages